ಬೆಂಗಳೂರು : ಕರ್ನಾಟಕ ಸರ್ಕಾರವು ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ ಹಾಗೂ ನೇಮಕಾತಿಗೆ ಸಂಬಂಧಿಸಿದಂತೆ ಮಹತ್ವದ ಆದೇಶ ಹೊರಡಿಸಿದೆ.
ಸರ್ಕಾರದ ಅಧಿಸೂಚನೆಯ ಪ್ರಕಾರ, ಅಂಜುಂ ಪರ್ವೇಜ್ (IAS, 1994 ಬ್ಯಾಚ್) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಮುನೀಶ್ ಮೌದ್ಗಿಲ್ (IAS, 1998 ಬ್ಯಾಚ್) ಅವರಿಗೆ ಈಗಿರುವ ಹುದ್ದೆಯ ಜೊತೆಗೆ ಮುಖ್ಯಮಂತ್ರಿಗಳ ಕಾರ್ಯಕ್ರಮ ಮತ್ತು ಯೋಜನೆ ಜಾರಿ ವಿಭಾಗದ ಪ್ರಧಾನ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಈ ಹುದ್ದೆಯನ್ನು ಹೊಸದಾಗಿ ಸೃಷ್ಟಿಸಲಾಗಿದೆ.
ದೀಪಾ ಚೋಲನ್ (IAS, 2008 ಬ್ಯಾಚ್) ಅವರನ್ನು ನಗರಾಭಿವೃದ್ಧಿ ಇಲಾಖೆಯಿಂದ ವರ್ಗಾಯಿಸಿ ಸಾರಿಗೆ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಇದೇ ವೇಳೆ, ಹುದ್ದೆಗಾಗಿ ನಿರೀಕ್ಷೆಯಲ್ಲಿದ್ದ ಕಾವೇರಿ ಬಿ.ಬಿ. (IAS, 2008 ಬ್ಯಾಚ್) ಅವರನ್ನು ನಗರಾಭಿವೃದ್ಧಿ ಇಲಾಖೆ (ಯುಡಿ ಮತ್ತು ಮುನ್ಸಿಪಾಲಿಟೀಸ್) ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಡಾ. ಎಂ.ವಿ. ವೆಂಕಟೇಶ್ (IAS, 2009 ಬ್ಯಾಚ್) ಅವರನ್ನು ಯೋಜನೆ, ಕಾರ್ಯಕ್ರಮ ಮೇಲ್ವಿಚಾರಣೆ ಮತ್ತು ಅಂಕಿಅಂಶ ಇಲಾಖೆ ಕಾರ್ಯದರ್ಶಿ ಹುದ್ದೆಯಿಂದ ವರ್ಗಾಯಿಸಿ ಸಹಕಾರ ಸಂಘಗಳ ನಿಬಂಧಕರಾಗಿ (Registrar for Co-operative Societies) ನೇಮಕ ಮಾಡಲಾಗಿದೆ.
ಅದೇ ರೀತಿ, ಆರ್. ಸೆಲ್ವಮಣಿ (IAS, 2013 ಬ್ಯಾಚ್) ಅವರನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯಿಂದ ವರ್ಗಾಯಿಸಿ ಸಾರಿಗೆ ಮತ್ತು ರಸ್ತೆ ಸುರಕ್ಷತಾ ಆಯುಕ್ತರಾಗಿ ನೇಮಕ ಮಾಡಲಾಗಿದೆ.
ರಾಜ್ಯ ಸರ್ಕಾರ ಹೊರಡಿಸಿರುವ ಈ ಆದೇಶಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

