ಮಾವು ತಿಂದ ಬಳಿಕ ಅನಾರೋಗ್ಯಕ್ಕೀಡಾಗಿ ಇಬ್ಬರು ಬಾಲಕಿಯರು ಮೃತಪಟ್ಟಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಬೀದರ್ ಮೂಲದ ಕುಟುಂಬ ತೆಲಂಗಾಣಕ್ಕೆ ವಲಸೆ ಹೋಗಿತ್ತು, ಇಬ್ಬರು ಸಹೋದರಿಯರು ಮಾವು ಸೇವಿಸಿದ ಕೆಲವೇ ಗಂಟೆಗಳಲ್ಲಿ ವಾಂತಿ ಹಾಗೂ ಹೊಟ್ಟೆನೋವಿನಿಂದ ಬಳಲತೊಡಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ.
ಮೃತ ಬಾಲಕಿಯರನ್ನು 17 ವರ್ಷದ ಭವಾನಿ ವೈಜಿನಾಥ್ ಮೇತ್ರೆ ಹಾಗೂ 10 ವರ್ಷದ ಸಂಧ್ಯಾರಾಣಿ ಎಂದು ಗುರುತಿಸಲಾಗಿದೆ. ಕುಟುಂಬದ ಇತರ ಸದಸ್ಯರಿಗೂ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿರುವುದಾಗಿ ವರದಿಯಾಗಿದೆ.
ಘಟನೆಯ ಬಳಿಕ ಆರೋಗ್ಯ ಇಲಾಖೆ ಹಾಗೂ ಪೊಲೀಸರು ತನಿಖೆ ಆರಂಭಿಸಿದ್ದು, ಮಾವು ಸೇರಿದಂತೆ ಅವರು ಸೇವಿಸಿದ್ದ ಆಹಾರದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಆಹಾರ ವಿಷಬಾಧೆಯಿಂದ ಈ ಸಾವು ಸಂಭವಿಸಿರಬಹುದೆಂದು ಶಂಕಿಸಲಾಗಿದೆ.
ಆದರೆ ನಿಖರ ಕಾರಣ ವೈದ್ಯಕೀಯ ವರದಿ ಹಾಗೂ ಪ್ರಯೋಗಾಲಯ ಪರೀಕ್ಷೆಗಳ ಬಳಿಕವೇ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆ ಜನರಲ್ಲಿ ಆತಂಕ ಮೂಡಿಸಿದ್ದು, ಹಣ್ಣುಗಳು ಹಾಗೂ ಆಹಾರ ಪದಾರ್ಥಗಳನ್ನು ಚೆನ್ನಾಗಿ ತೊಳೆದು, ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಂಡ ಬಳಿಕವೇ ಸೇವಿಸುವಂತೆ ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ.

