ಬೀದರ್ : ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಬೀದರ್ನ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 45 ಕೋಟಿ ರೂಪಾಯಿಗಳ ಬಹುಕೋಟಿ ಹಗರಣವು ಇದೀಗ ಸಾಬೀತಾಗಿದ್ದು, ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಸೇರಿದಂತೆ ಒಟ್ಟು ಆರು ಜನ ಪ್ರಮುಖ ಆರೋಪಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಪ್ರೊ. ಹೆಚ್.ಡಿ. ನಾರಾಯಣಸ್ವಾಮಿ, 2017-18ರ ಅವಧಿಯಲ್ಲಿ ವಿವಿಯ ಹಣಕಾಸು ನಿಯಂತ್ರಣಾಧಿಕಾರಿಯಾಗಿದ್ದ ಕೆ.ಎಲ್. ಸುರೇಶ್, ಮೃತ್ಯುಂಜಯ ಹಿರೇಮಠ, ಬೊಪಣ್ಣ, ಮಂಜುನಾಥ ಹಾಗೂ ರಾಮಗೊಂಡ ಬಂಧಿತ ಆರೋಪಿಗಳಾಗಿದ್ದಾರೆ.
ಬೀದರ್ ಜಿಲ್ಲಾ ಸತ್ರ ನ್ಯಾಯಾಲಯವು ಆರೋಪಿಗಳ ವಿರುದ್ಧ ವಾರೆಂಟ್ ಹೊರಡಿಸಿದ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಈ ಹಠಾತ್ ಬಂಧನ ಪ್ರಕ್ರಿಯೆಯನ್ನು ಕೈಗೊಂಡಿದ್ದಾರೆ.
ಏನಿದು 45 ಕೋಟಿ ರೂ. ಹಗರಣ? 2017-18ರ ಅವಧಿಯಲ್ಲಿ ವಿಶ್ವವಿದ್ಯಾಲಯಕ್ಕೆ ಅಗತ್ಯವಿರುವ ವಿವಿಧ ಸಾಮಗ್ರಿಗಳ ಖರೀದಿಯ ಹೆಸರಿನಲ್ಲಿ ಈ ದೈತ್ಯ ಹಗರಣ ನಡೆದಿತ್ತು.
ಆರೋಪಿಗಳು ಯಾವುದೇ ಸಾಮಗ್ರಿಗಳನ್ನು ಖರೀದಿಸದೆಯೇ, ಕೇವಲ ನಕಲಿ ಬಿಲ್ಗಳನ್ನು ಸೃಷ್ಟಿಸುವ ಮೂಲಕ ಬರೋಬ್ಬರಿ 45 ಕೋಟಿ ರೂಪಾಯಿಗೂ ಅಧಿಕ ಸಾರ್ವಜನಿಕರ ಹಣವನ್ನು ಲೂಟಿ ಮಾಡಿದ್ದರು. ಈ ದೂರಿಗೆ ಸಂಬಂಧಿಸಿದಂತೆ 2021ರಲ್ಲಿ ಲೋಕಾಯುಕ್ತ ಪೊಲೀಸರು ಪ್ರಾಥಮಿಕ ದಾಳಿ ನಡೆಸಿ ತನಿಖೆ ಆರಂಭಿಸಿದ್ದರು.
ರಾಜ್ಯಾದ್ಯಂತ ನಡೆದಿದ್ದ ಸರಣಿ ದಾಳಿಗಳು ಲೋಕಾಯುಕ್ತ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿ, ಕಳೆದ 2025ರ ಸೆಪ್ಟೆಂಬರ್ 10ರಂದು ರಾಜ್ಯದಾದ್ಯಂತ 25ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಲಕ್ಕೆ ಬೃಹತ್ ದಾಳಿ ನಡೆಸಿದ್ದರು.
ಈ ವೇಳೆ ಹಗರಣಕ್ಕೆ ಸಂಬಂಧಿಸಿದ ಲೂಟಿಯ ಸಂಪೂರ್ಣ ಜಾಲವನ್ನು ಬಯಲಿಗೆಳೆಯುವಂತಹ ಪ್ರಮುಖ ದಾಖಲೆಗಳು ಮತ್ತು ನಕಲಿ ಬಿಲ್ಗಳನ್ನು ವಶಪಡಿಸಿಕೊಳ್ಳಲಾಗಿತ್ತು.
ತನಿಖೆಯ ವೇಳೆ ವಿಶ್ವವಿದ್ಯಾಲಯದ ಉನ್ನತಾಧಿಕಾರಿಗಳು, ಸಿಬ್ಬಂದಿ ಹಾಗೂ ಖಾಸಗಿ ಎಂಟರ್ಪ್ರೈಸಸ್ ಮಾಲೀಕರು ಪರಸ್ಪರ ಶಾಮೀಲಾಗಿ ವಂಚಿಸಿರುವುದು ಸಾಬೀತಾಗಿದೆ.
ನ್ಯಾಯಾಂಗ ಬಂಧನಕ್ಕೆ ಆರೋಪಿಗಳು ಸದ್ಯ ಬಂಧಿತ ಆರೋಪಿಗಳನ್ನು ಲೋಕಾಯುಕ್ತ ಪೊಲೀಸರು ವೈದ್ಯಕೀಯ ತಪಾಸಣೆಯ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.
ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಈ ಹಗರಣದಲ್ಲಿ ಭಾಗಿಯಾಗಿರುವ ಇನ್ನುಳಿದವರ ವಿರುದ್ಧವೂ ತನಿಖೆ ಮುಂದುವರಿದಿದೆ. ಮಾಜಿ ಉಪಕುಲಪತಿ ಸೇರಿದಂತೆ ಉನ್ನತ ಹುದ್ದೆಯಲ್ಲಿದ್ದವರೇ ಜೈಲು ಪಾಲಾಗಿರುವುದು ಶೈಕ್ಷಣಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

