ಬೆಳಗಾವಿ: ಮನೆ ರಿಪೇರಿ ಮಾಡುತ್ತಿದ್ದ ವೇಳೆ ಮನೆಯ ಛಾವಣಿ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘೋರ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮದಲ್ಲಿ ನಡೆದಿದೆ.
ನಿರಂತರವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಮನೆ ಸೋರುತ್ತಿತ್ತು.ಈ ಹಿನ್ನೆಲೆಯಲ್ಲಿ ರಿಪೇರಿ ಕಾರ್ಯ ಮಾಡುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಮಾದೇವ್ ಕೃಷ್ಣಪ್ಪ ಬಡಿಗೇರ್ (48), ಸೈಯದ್ ಕೆಂಪವಾಡಿ (32) ಮೃತ ಕಾರ್ಮಿಕರು.
ಲಕ್ಷ್ಮೀಬಾಯಿ ನಂದಗೊಂಡ ಎಂಬವರ ಮನೆ ರಿಪೇರಿ ಮಾಡುವಾಗಈ ಘಟನೆ ನಡೆದಿದೆ. ಮನೆಯ ರಿಪೇರಿ ವೇಳೆ ಮನೆ ಕುಸಿದು ಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ಮಣ್ಣಿನ ಅಡಿಯಲ್ಲಿ ಸಿಲುಕಿದ್ದರು.
ತಕ್ಷಣ ಸ್ಥಳೀಯರು ಕಾರ್ಮಿಕರನ್ನು ರಕ್ಷಿಸಿ ಮಹಾರಾಷ್ಟ್ರದ ಜತ್ತ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರೂ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಐಗಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


