ಗದಗ: ಕ್ಷುಲ್ಲಕ ಕಾರಣಕ್ಕೆ ಪತಿ, ಪತ್ನಿ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಕಬ್ಬಿಣದ ರಾಡ್ ನಿಂದ ಹೊಡೆದು ಪತಿಯನ್ನೇ ಪತ್ನಿ ಕೊಲೆ ಮಾಡಿದ್ದಾರೆ.
ಗದಗ ಜಿಲ್ಲೆ ನರಗುಂದ ತಾಲೂಕಿನ ರೆಡ್ಡೆರನಾಗರೂರು ಗ್ರಾಮದಲ್ಲಿ ಘಟನೆ ನಡೆದಿದೆ. ವಿಶ್ವನಾಥ ಹಾದಿಮನಿ(28) ಕೊಲೆಯಾದ ವ್ಯಕ್ತಿ.
ಪತ್ನಿ ಕವಿತಾ ರಾಡ್ ನಿಂದ ಹೊಡೆದು ಕೊಲೆ ಮಾಡಿದ್ದಾರೆ. ಪರಸ್ಪರ ಪ್ರೀತಿಸುತ್ತಿದ್ದ ಇಬ್ಬರೂ ಮನೆಯವರನ್ನ ಒಪ್ಪಿಸಿ ಮದುವೆಯಾಗಿದ್ದರು. 2022ರ ಫೆಬ್ರವರಿಯಲ್ಲಿ ಮದುವೆ ನಡೆದಿತ್ತು. ವಿಶ್ವನಾಥ್- ಕವಿತಾ ದಂಪತಿಗೆ ಮೂರು ವರ್ಷದ ಗಂಡು ಮಗು ಇದೆ.
ಮದುವೆಯ ನಂತರ ಇಬ್ಬರ ನಡುವೆ ಜಗಳ ನಡೆದು ಪತ್ನಿ ಕವಿತಾ ತವರಿಗೆ ಸೇರಿದ್ದರು. ಕಳೆದ ಮೂರು ವರ್ಷಗಳಿಂದ ಕವಿತಾ ತವರು ಮನೆಯಲ್ಲಿ ಉಳಿದುಕೊಂಡಿದ್ದರು. ವಿಶ್ವನಾಥ್ ಸಹೋದರಿಯ ಮದುವೆ ಹಿನ್ನೆಲೆ ಮರಳಿ ಗಂಡನ ಮನೆಗೆ ಬಂದಿದ್ದರು.
ಮನೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಮತ್ತೆ ದಂಪತಿಯ ನಡುವೆ ಜಗಳವಾಗಿದೆ. ಜಗಳ ವಿಕೋಪಕ್ಕೆ ಹೋಗಿ ಪತಿಯ ಕೊಲೆಯಲ್ಲಿ ಅಂತ್ಯವಾಗಿದೆ. ಪತ್ನಿ ಕವಿತಾ ಹಾದಿಮನಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸ್ಥಳಕ್ಕೆ ಪೊಲೀಸರು, ಸುಕೋ ಟೀಂ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

