ಬೆಂಗಳೂರು : ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯಿರಿ ಎಂದು ಸರ್ಕಾರಕ್ಕೆ ಮುಸ್ಲಿಂ ಸಂಘಟನೆಗಳು ಆಗ್ರಹಿಸಿದೆ. ಬೆಂಗಳೂರಿನಲ್ಲಿ ಕರ್ನಾಟಕ ಮುಸ್ಲಿಂ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 'ಕರ್ನಾಟಕ ಮುಸ್ಲಿಂ ಸಮಾವೇಶ'ದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಮುದಾಯದ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಚುನಾವಣೆಗೂ ಮುನ್ನ ನೀಡಿದ್ದ ಪ್ರಮುಖ ಭರವಸೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ, ಒಟ್ಟು 10 ಪ್ರಮುಖ ಬೇಡಿಕೆಗಳ ಪಟ್ಟಿಯನ್ನು ಸರ್ಕಾರದ ಮುಂದಿಡಲಾಗಿದೆ.
ಮುಖ್ಯವಾಗಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ-2020 (ಗೋಹತ್ಯೆ ನಿಷೇಧ ಕಾಯ್ದೆ) ರೈತರು, ಮಾಂಸ ವ್ಯಾಪಾರಿಗಳು ಮತ್ತು ಸಾರಿಗೆ ವಲಯದವರ ಜೀವನೋಪಾಯಕ್ಕೆ ಮಾರಕವಾಗಿದ್ದು, ಇದನ್ನು ಕೂಡಲೇ ರದ್ದುಗೊಳಿಸಬೇಕು ಅಥವಾ ಸೂಕ್ತ ತಿದ್ದುಪಡಿ ತರಬೇಕು ಎಂದು ಸಮಾವೇಶದಲ್ಲಿ ತೀವ್ರ ಒತ್ತಾಯ ಕೇಳಿಬಂದಿದೆ.
ಈ ಹಿಂದಿನ ಬಿಜೆಪಿ ಸರ್ಕಾರವು ಮುಸ್ಲಿಮರಿಗೆ ಹಿಂಸೆ ನೀಡುವ ಉದ್ದೇಶದಿಂದಲೇ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿತ್ತು ಎಂದು ಸಮಾವೇಶದಲ್ಲಿ ಆರೋಪಿಸಲಾಗಿದೆ.
· ಪ್ರಸ್ತುತ ಈ ಕಾಯ್ದೆಯು ರೈತರು, ಕಾರ್ಮಿಕರು, ಮಾಂಸದ ವ್ಯಾಪಾರಿಗಳು ಹಾಗೂ ಜಾನುವಾರು ಸಾಗಾಟಗಾರರ ಪಾಲಿಗೆ “ಮರಣ ಶಾಸನ”ವಾಗಿ ಮಾರ್ಪಟ್ಟಿದೆ ಎಂದು ವಿವರಿಸಲಾಗಿದೆ.
ಈ ಕಾನೂನಿನಿಂದಾಗಿ ನಕಲಿ ಗೋರಕ್ಷಕರಿಗೆ ಜಾನುವಾರು ಸಾಗಾಟಗಾರರ ಮೇಲೆ ಹಲ್ಲೆ ನಡೆಸಲು ಮತ್ತು ಅವರನ್ನು ಲೂಟಿ ಮಾಡಲು ಸುವರ್ಣಾವಕಾಶ ಸಿಕ್ಕಂತಾಗಿದೆ ಎಂದು ಕಳವಳ ವ್ಯಕ್ತಪಡಿಸಲಾಗಿದೆ.
ಸರ್ಕಾರಕ್ಕೆ ಒತ್ತಾಯ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಈ ಕಾಯ್ದೆಯನ್ನು ವಾಪಸ್ ಪಡೆಯುವ ಅಥವಾ ತಿದ್ದುಪಡಿ ಮಾಡುವ ಭರವಸೆ ನೀಡಿತ್ತು, ಆದರೆ ಇದುವರೆಗೆ ಅದನ್ನು ಮಾಡಿಲ್ಲ .ಆದ್ದರಿಂದ ಈ ಜನವಿರೋಧಿ ಹಾಗೂ ಅಕ್ರಮ ಕಾನೂನನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಸಮಾವೇಶವು ಸರ್ಕಾರವನ್ನು ಒತ್ತಾಯಿಸಿದೆ.

