ಬೆಂಗಳೂರು : ರಾಜ್ಯದಲ್ಲಿ ಸಂಪೂರ್ಣವಾಗಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಿಲ್ಲ. ಒಟ್ಟು 1400 ಜನೌಷಧಿ ಕೇಂದ್ರಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿರುವ 180 ಕೇಂದ್ರಗಳನ್ನು ಮಾತ್ರ ತೆರವುಗೊಳಿಸುವ ಬಗ್ಗೆ ಚರ್ಚಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರವೇ ಉಚಿತವಾಗಿ ಔಷಧಿಗಳನ್ನು ನೀಡುವಾಗ, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಮಾರಾಟಕ್ಕೆ ಅವಕಾಶ ಕೊಡುವುದು ಸರಿಯಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿರುವ 180 ಕೇಂದ್ರಗಳ ಹೊರತಾಗಿ ರಾಜ್ಯದಲ್ಲಿ ಇನ್ನು 1220 ಜನೌಷಧಿ ಕೇಂದ್ರಗಳಿವೆ. ಅಲ್ಲದೇ ತಕ್ಷಣಕ್ಕೆ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಎಲ್ಲಾ ಜನೌಷಧಿ ಕೇಂದ್ರಗಳನ್ನು ಮುಚ್ಚಿಸಿ ಎಂದು ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಹೊಸದಾಗಿ ಸಲ್ಲಿಕೆಯಾಗಿದ್ದ 31 ಪ್ರಸ್ತಾವನೆಗಳನ್ನು ತಿರಸ್ಕರಿಸಲಾಗಿದೆ. ಹಾಲಿ ಆಸ್ಪತ್ರೆಗಳ ಆವರಣದಲ್ಲಿರುವ ಕೇಂದ್ರಗಳು ಇಲಾಖೆ ಮತ್ತು ಆಸ್ಪತ್ರೆಗಳೊಂದಿಗೆ ಮಾಡಿಕೊಂಡಿರುವ ಒಪ್ಪಂದಗಳನ್ನು ಪರಿಶೀಲಿಸಿ ಕ್ರಮ ಜರುಗಿಸಲು ಸೂಚಿಸಲಾಗಿದೆ. ಜನೌಷಧಿ ಕೇಂದ್ರ ಸರ್ಕಾರದ ಯೋಜನೆ ಎಂಬ ಕಾರಣಕ್ಕೆ ರಾಜಕೀಯ ಮಾಡುವ ಯಾವುದೇ ಉದ್ದೇಶವಿಲ್ಲ.
ಆದರೆ, ಜನೌಷಧಿ ಕೇಂದ್ರಗಳ ವಿಚಾರದಲ್ಲಿ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿಯೇ ಔಷಧಿ ಸಿಗುವಾಗ ಆಸ್ಪತ್ರೆಗಳ ಆವರಣದಲ್ಲಿ ಔಷಧ ಮಾರಾಟಕ್ಕೆ ಅವಕಾಶ ಮಾಡಿಕೊಡಬಾರದು ಎಂಬ ಒಂದೇ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸರ್ಕಾರಿ ಆಸ್ಪತ್ರೆಗಳ ಔಷಧಿ ಕೇಂದ್ರಗಳಲ್ಲಿ ಔಷಧಗಳ ಕೊರತೆಯಿಲ್ಲ. ಕೆಲವು ಕಡಿಮೆ ಬೇಡಿಕೆ ಇರುವ ಔಷಧಿಗಳು ಇಲ್ಲದಿದ್ದರೆ ಅವುಗಳನ್ನು BPPI ನಿಂದ ಖರೀದಿಸಲು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ.
ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಉಚಿತವಾಗಿ ಔಷಧಗಳನ್ನು ಪಡೆಯಬೇಕು. ವೈದ್ಯರು ಚೀಟಿ ಕೊಟ್ಟು ಹೊರಗಡೆಯಿಂದ ಔಷಧಗಳನ್ನು ತರಿಸುವ ಪದ್ಧತಿ ನಿಲ್ಲಬೇಕು ಎಂದು ದಿನೇಶ್ ಗುಂಡೂರಾವ್ ಅವರು ಅಭಿಪ್ರಾಯಪಟ್ಟಿದ್ದಾರೆ.




