ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಬಿ.ಆರ್.ರವಿಕಾಂತೇಗೌಡ ಅವರು ಹೂಡಿದ್ದ ಸಿವಿಲ್ ಪ್ರಕರಣದಲ್ಲಿ, ನ್ಯಾಯಾಲಯ ನೀಡಿದ್ದ ಆದೇಶವನ್ನು ಪಾಲಿಸದ ಕಾರಣ ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ ಬೆಂಗಳೂರು ಗ್ರಾಮಾಂತರ ಸಿವಿಲ್ ನ್ಯಾಯಾಲಯ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.
ರವಿಕಾಂತೇಗೌಡ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಅಬ್ದುಲ್ ಸಲೀಂ ಈ ಕುರಿತಂತೆ ಆದೇಶಿಸಿದ್ದಾರೆ.
2023ರ ಸೆಪ್ಟೆಂಬರ್ 8ರಂದು ನ್ಯಾಯಾಲಯ ನೀಡಿದ್ದ ಮಧ್ಯಂತರ ಆದೇಶವನ್ನು ಪ್ರತಿವಾದಿಯಾದ ‘ಪವರ್ ಸ್ಮಾರ್ಟ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ’ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಸಂಜೀವ ಶೆಟ್ಟಿ ಅವರು ಉಲ್ಲಂಘಿಸುವ ಮೂಲಕ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿರುವುದು ಸಾಬೀತಾಗಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.
ಇನ್ನು ರಾಕೇಶ್ ಶೆಟ್ಟಿ ಮೂರು ತಿಂಗಳ ಕಾಲ ಜೈಲಿನಲ್ಲಿ ಇರಬೇಕು. ಜೈಲಿನಲ್ಲಿ ರಾಕೇಶ್ ಶೆಟ್ಟಿ ಅವರಿಗೆ ತಗಲುವ ಖರ್ಚು ವೆಚ್ಚಗಳನ್ನು ರವಿಕಾಂತೇಗೌಡ ಅವರೇ ಭರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.




