ತುಮಕೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಏಪ್ರಿಲ್ 1ರಂದು ತುಮಕೂರಿಗೆ ಭೇಟಿ ನೀಡಲಿದ್ದಾರೆ. ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಲಿಂ. ಡಾ.ಶ್ರೀ. ಶಿವಕುಮಾರ ಮಹಾ ಸ್ವಾಮೀಜಿಯವರ 119ನೇ ಜಯಂತಿ ಮತ್ತು ಗುರುವಂದನಾ ಮಹೋತ್ಸವ ಏಪ್ರಿಲ್ 1ರಂದು ಬುಧವಾರ ಸಿದ್ದಗಂಗಾ ಮಠದಲ್ಲಿ ನಡೆಯಲಿದೆ.
ಶ್ರೀಮಠದ ಗೋಸಲಸಿದ್ದೇಶ್ವರ ವೇದಿಕೆಯಲ್ಲಿ ಬುಧವಾರ ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ.
ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ದೇಶದ ಮೊದಲ ಮಹಿಳಾ ರಾಷ್ಟ್ರಪತಿಯಾಗಿದ್ದ ಪ್ರತಿಭಾ ಪಾಟೀಲ್ ಈ ಹಿಂದೆ ಶ್ರೀಗಳ ಜನ್ಮದಿನ ಮತ್ತು ಗುರುವಂದನಾ ಮಹೋತ್ಸವದಲ್ಲಿ ಭಾಗವಹಿಸಿದ್ದರು. ಈಗ ಎರಡನೇ ಮಹಿಳಾ ರಾಷ್ಟ್ರಪತಿ ದ್ರೌಪದಿ ಮುರ್ಮು ಶ್ರೀ ಮಠಕ್ಕೆ ಆಗಮಿಸುತ್ತಿರುವುದು ಹೆಮ್ಮೆಯ ವಿಚಾರ ಎಂದು ಹೇಳಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ವೇದಿಕೆ ಕಾರ್ಯಕ್ರಮ ಆರಂಭವಾಗಲಿದ್ದು, ಮಧ್ಯಾಹ್ನ 12:30ರೊಳಗೆ ಮುಗಿಯಲಿದೆ. ಕೇಂದ್ರ ಸಚಿವರು, ರಾಜ್ಯದ ಸಚಿವರು, ಶಾಸಕರು ಭಾಗವಹಿಸಲಿದ್ದಾರೆ. ಬೆಳಗಿನ ಜಾವ ಗದ್ದುಗೆಯಲ್ಲಿ ವಿಶೇಷ ಪೂಜಾ ಕೈಂಕರ್ಯ ನೆರವೇರಲಿದೆ.




