ಚೇಳೂರು : ರಾಜ್ಯದಲ್ಲಿ ದಲಿತ ಸಮುದಾಯದ ದಶಕಗಳ ಬೇಡಿಕೆಯಾದ ಒಳಮೀಸಲಾತಿಯನ್ನು ತಕ್ಷಣವೇ ಜಾರಿಗೆ ತರಬೇಕು ಎಂದು ಕದಸಂಸ ಜಿಲ್ಲಾ ಸಂಚಾಲಕ ಕಡ್ಡಿಲು ವೆಂಕಟರವಣಪ್ಪ ಆಗ್ರಹಿಸಿದರು.
ಬುಧವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಒಳಮೀಸಲಾತಿ ಜಾರಿಯಾಗಬೇಕೆಂದು ಆಗ್ರಹಿಸಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,
ಒಳಮೀಸಲಾತಿ ಜಾರಿಯಾಗದ ಕಾರಣ ಅರ್ಹ ಸಮುದಾಯಗಳಿಗೆ ಅನ್ಯಾಯವಾಗುತ್ತಿದೆ. ಸರ್ಕಾರವು ಈ ಕೂಡಲೇ ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಲು ಮುಂದಾಗಬೇಕು. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಈ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ದಸಂಸ ತಾಲೂಕು ಸಂಚಾಲಕ ಜಿ. ನರಸಿಂಹಪ್ಪ ಅವರು, ಒಳಮೀಸಲಾತಿ ಎನ್ನುವುದು ನಮ್ಮ ಸಾಂವಿಧಾನಿಕ ಹಕ್ಕು. ಇದನ್ನು ಪಡೆಯಲು ನಾವು ಸದಾ ಸಿದ್ಧರಿದ್ದೇವೆ. ಸಂಘಟನೆಯು ಈ ಹೋರಾಟವನ್ನು ಪ್ರತಿ ಹಳ್ಳಿಗೂ ಕೊಂಡೊಯ್ಯಲಿದೆ. ಮುಂಬರುವ ದಿನಗಳಲ್ಲಿ ತಾಲೂಕು ಕೇಂದ್ರದಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ವಿವರಿಸಿದರು.
ಮಾದರ ಮಹಾಸಭಾ ತಾಲೂಕು ಉಪಾಧ್ಯಕ್ಷ ಊದುವಾರಪಲ್ಲಿ ಬಾಬು ಮಾತನಾಡಿ,ಒಳಮೀಸಲಾತಿ ಜಾರಿಯಾಗದಿದ್ದರೆ ತಳಮಟ್ಟದ ಕುಟುಂಬಗಳಿಗೆ ಅನ್ಯಾಯವಾಗಲಿದೆ. ಸರ್ಕಾರ ಕೂಡಲೇ ಇದನ್ನು ಜಾರಿಗೆ ತಂದು ಎಲ್ಲ ಉಪಜಾತಿಗಳಿಗೂ ಸಮಾನ ನ್ಯಾಯ ಒದಗಿಸಬೇಕು, ತಪ್ಪಿದಲ್ಲಿ ಹೋರಾಟ ಅನಿವಾರ್ಯ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಪಿ. ಮಂಜುನಾಥ, ತುಳವಣೂರು ವೆಂಕಟರವಣಪ್ಪ, ಅಜರುದ್ದೀನ್, ರಾಮಚಂದ್ರ, ಪೋಸ್ಟ್ ನರಸಿಂಹ, ದುಗಿನಾಯಕನಹಳ್ಳಿ ನಾಗೇಶ್, ನರಸಿಂಹಪ್ಪ ಸೇರಿದಂತೆ ಇತರರು ಹಾಜರಿದ್ದರು.
ವರದಿ :ಯಾರಬ್. ಎಂ.




