ತುರುವೇಕೆರೆ: ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳ್ಳಬೇಕಾದರೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯೂ ಬಹಳ ಮುಖ್ಯ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ರಂಗನಾಥ್ ತಿಳಿಸಿದರು.
ಪಟ್ಟಣದ ವಾಧಾ ಎಜುಕೇಷನ್ ಸೊಸೈಟಿಯ ಆಶ್ರಯದಲ್ಲಿ ನಡೆಯುತ್ತಿರುವ ಪ್ರಿಯಾ ಆಂಗ್ಲ ಪ್ರೌಢಶಾಲೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ಕ್ರೀಡೆ, ಶೈಕ್ಷಣಿಕ ಚಟುವಟಿಕೆ ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಮಕ್ಕಳ ಜ್ಞಾನವೃದ್ದಿ ಶಿಕ್ಷಣ ಹೇಗೆ ಅಗತ್ಯವೋ ಅದೇ ರೀತಿ ಮಾನಸಿಕ, ದೈಹಿಕ ಸದೃಢತೆಗೆ ಕ್ರೀಡೆ ಹಾಗೂ ಪಠ್ಯೇತರ ಚಟುವಟಿಕೆಗಳು ಅತ್ಯಗತ್ಯವಾಗಿದೆ ಎಂದರು.
ಶಾಲೆಗೆ ಕಳಿಸುತ್ತೇವೆ, ನಾವಂದುಕೊಂಡಂತೆ ಮಕ್ಕಳು ಹೆಚ್ಚಿನ ಅಂಕ ಗಳಿಸಬೇಕು, ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಉದ್ಯೋಗ ಪಡೆದು ಹಣ ಸಂಪಾದನೆ ಮಾಡಬೇಕೆನ್ನುವ ಒಂದಂಶದ ಕಾರ್ಯಕ್ರಮವನ್ನು ಪೋಷಕರು ತಲೆಯಿಂದ ತೆಗೆದುಹಾಕಿ, ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಮಾಡಬೇಕು. ಅಂಕ ಗಳಿಕೆಗೆಷ್ಟೇ ಮಕ್ಕಳು ಸೀಮಿತವಾಗಬಾರದು, ಅಂಕ ಗಳಿಕೆಯ ಜೊತೆಗೆ ಮಕ್ಕಳಲ್ಲಿ ಸಂಸ್ಕಾರಯುತ, ಮೌಲ್ಯಯುತ ಶಿಕ್ಷಣ ನೀಡಬೇಕಿದೆ. ಈ ನಿಟ್ಟಿನಲ್ಲಿ ಪ್ರಿಯಾ ಆಂಗ್ಲ ಶಾಲೆಯು ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದರ ಜೊತೆಗೆ ಮೌಲ್ಯಯುತ ಶಿಕ್ಷಣವನ್ನು ನೀಡುತ್ತಾ ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ಕೊಡುಗೆಯಾಗಿ ನೀಡುತ್ತಿರುವುದು ಸಂತೋಷದ ವಿಚಾರವಾಗಿದೆ ಎಂದರು.
ಸಮಾರಂಭದಲ್ಲಿ ಕ್ರೀಡೆಯಲ್ಲಿ ವಿಜೇತರಾದವರಿಗೆ ಹಾಗೂ ತರಗತಿ ಹಂತದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು. ವಾಧಾ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಎಂ.ಎನ್.ಚಂದ್ರೇಗೌಡ, ಕಾರ್ಯದರ್ಶಿ ಪುಷ್ಪಲತಾಚಂದ್ರೇಗೌಡ, ಸಹಕಾರ್ಯದರ್ಶಿ ಚೇತನ್, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ: ಗಿರೀಶ್ ಕೆ ಭಟ್




