ಬೆಂಗಳೂರು : ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ ಕಾರ್ಯದರ್ಶಿ,ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ವಿಧಾನ ಸೌಧ ಬರೆದಿರುವ ಪತ್ರ ವೈರಲ್ ಆಗಿದೆ.
ನಿರ್ದೇಶಕರು, ವಾರ್ತಾ ಮತ್ತು ಪ್ರಚಾರ ಇಲಾಖೆ ಇವರಿಗೆ ಸರ್ಕಾರದ ಅಧೀನ ಕಾರ್ಯದರ್ಶಿ ಸಿಆಸುಇ (ಕಾರ್ಯಕಾರಿ) ಬರೆದಿರುವ ಪತ್ರವು ಮಾಧ್ಯಮದವರು ವಿಧಾನಸೌಧ ಕಟ್ಟಡದಲ್ಲಿ ಅವರಿಗೆ ನಿಗದಿಪಡಿಸಲಾದ ಸ್ಥಳದಲ್ಲಿ ಮಾತ್ರ ಸಂದರ್ಶನ ಮಾಡುವಂತೆ ನಿರ್ದೇಶನ ನೀಡುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.
ಪತ್ರದ ವಿವರ: ಈ ವಿಷಯಕ್ಕೆ ಸಂಬಂಧಿಸಿದಂತೆ ಸದರಿ ಪತ್ರದಲ್ಲಿನ ಕೋರಿಕೆಯ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಪ್ರಚಾರ ಇಲಾಖೆಯು ಶಿಫಾರಸ್ಸು ಮಾಡುವ ಮಾಧ್ಯಮ ಪ್ರತಿನಿಧಿಗಳಿಗೆ ಮಾತ್ರ ಸಿಆಸು ಇಲಾಖೆ (ಕಾರ್ಯಕಾರಿಯಲ್ಲಿ ಗುರುತಿನ ಚೀಟಿ ವಿತರಿಸಲಾಗುತ್ತಿದೆ.
ಈ ರೀತಿಗುರುತಿನ ಚೀಟಿ ಹೊಂದಿರುವ ಎಲ್ಲಾ ಪತ್ರಿಕಾ ಮಾಧ್ಯಮ ಪ್ರತಿನಿಧಿಗಳಿಗೆ ಭದ್ರತಾ ಹಿತದೃಷ್ಟಿಯಿಂದ ವಿಧಾನಸೌಧ ಪಶ್ಚಿಮ ದ್ವಾರದ ಪೋರ್ಟಿಕೋ ಬಳಿ ನಿಗದಿಪಡಿಸಲಾಗಿರುವ ಸ್ಥಳದಲ್ಲಿ ಮಾತ್ರ ಬೈಟ್/ ಹೇಳಿಕೆಗಳನ್ನು ಪಡೆದುಕೊಳ್ಳುವಂತೆ ಹಾಗೂ ವಿಧಾನಸೌಧ ಒಳ ಪ್ರವೇಶಿಸುವ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳು/ ಮಾನ್ಯ ಉಪ ಮುಖ್ಯಮಂತ್ರಿಗಳು/ ಮಾನ್ಯ ಸಚಿವರುಗಳು/ ಗಣ್ಯ ವ್ಯಕ್ತಿಗಳಿಂದ ಬೈಟ್ ತೆಗೆದುಕೊಳ್ಳಲು ಹಿಂಬಾಲಿಸದಂತೆ ಸೂಕ್ತ ಸಲಹೆ/ ಸೂಚನೆಗಳನ್ನು ನೀಡುವಂತೆ ತಮಗೆ ತಿಳಿಸಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದು ಹೇಳಿದ್ದಾರೆ.




