ತುರುವೇಕೆರೆ: ಸ್ಥಳೀಯ ಪಟ್ಟಣ ಪಂಚಾಯ್ತಿಯ ನೂತನ ಅಧ್ಯಕ್ಷರಾಗಿ ಶೀಲಾಶಿವಪ್ಪನಾಯಕ ಅವಿರೋಧವಾಗಿ ಆಯ್ಕೆಯಾದರು.
ಹಿಂದಿನ ಅಧ್ಯಕ್ಷೆ ಸ್ವಪ್ನನಟೇಶ್ ಅವರ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಒಂದನೇ ವಾರ್ಡಿನ ಸದಸ್ಯೆ ಶೀಲಾಶಿವಪ್ಪನಾಯಕ ನಾಮಪತ್ರ ಸಲ್ಲಿಸಿದ್ದರು. ಚುನಾವಣಾ ಪ್ರಕ್ರಿಯೆ ಸಂದರ್ಭದಲ್ಲಿ 14 ಸದಸ್ಯರ ಪೈಕಿ 3 ಮಂದಿ ಸದಸ್ಯರು ಗೈರಾಗಿದ್ದರು.
ಅಧ್ಯಕ್ಷ ಸ್ಥಾನಕ್ಕೆ ಏಕೈಕ ನಾಮಪತ್ರ ಸಲ್ಲಿಕೆಯಾಗಿದ್ದ ಕಾರಣ ಪಟ್ಟಣ ಪಂಚಾಯ್ತಿ ನೂತನ ಅಧ್ಯಕ್ಷರಾಗಿ ಶೀಲಾಶಿವಪ್ಪನಾಯಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ, ಗ್ರೇಡ್ 2 ತಹಸೀಲ್ದಾರ್ ಸುಮತಿ ಅವರು ಘೋಷಿಸಿದರು. ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಮಂಜುನಾಥ್, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಶ್ರೀನಾಥ್ ಬಾಬು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.
ನೂತನ ಅಧ್ಯಕ್ಷೆ ಶೀಲಾಶಿವಪ್ಪನಾಯಕ ಮಾತನಾಡಿ, ಪಟ್ಟಣ ಪಂಚಾಯ್ತಿ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆಯಾಗಲು ಸಹಕಾರ ನೀಡಿದ ಮಾಜಿ ಶಾಸಕರುಗಳಾದ ಎಂ.ಡಿ. ಲಕ್ಷ್ಮೀನಾರಾಯಣ್, ಮಸಾಲಾ ಜಯರಾಮ್ ಹಾಗೂ ಪಟ್ಟಣ ಪಂಚಾಯ್ತಿಯ ಎಲ್ಲಾ ಸದಸ್ಯರಿಗೆ ಧನ್ಯವಾದಗಳನ್ನು ಅರ್ಪಿಸುವುದಾಗಿ ಹೇಳಿದರು.
ನೂತನ ಅಧ್ಯಕ್ಷೆ ಶೀಲಾಶಿವಪ್ಪನಾಯಕ ಅವರನ್ನು ಪಪಂ ಉಪಾಧ್ಯಕ್ಷೆ ಭಾಗ್ಯ, ಸದಸ್ಯರಾದ ಸ್ವಪ್ನ ನಟೇಶ್, ಆಶಾರಾಜಶೇಖರ್, ಯಜಮಾನ್ ಮಹೇಶ್, ಅಂಜನ್ ಕುಮಾರ್, ಎನ್.ಆರ್.ಸುರೇಶ್, ಚಿದಾನಂದ್, ಪ್ರಭಾಕರ್, ಆರ್.ಮಧು, ಕೆ. ರವಿ, ಪಪಂ ಮುಖ್ಯಾಧಿಕಾರಿ ಶ್ರೀನಾಥ್ ಬಾಬು, ರೋಟರಿ ಅಧ್ಯಕ್ಷ ಉಮೇಶ್, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಪಪಂ ಸಿಬ್ಬಂದಿ ವರ್ಗ, ಅಭಿಮಾನಿಗಳು ಅಭಿನಂದಿಸಿದರು.
ವರದಿ: ಗಿರೀಶ್ ಕೆ ಭಟ್, ತುರುವೇಕೆರೆ




