ಮೈಸೂರು: ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಈ ವರ್ಷದಿಂದಲೇ ದ್ವಿಭಾಷಾ ನೀತಿಯನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನಿರ್ಧಾರದ ಕುರಿತು ಸ್ಪಷ್ಟನೆ ನೀಡಿದರು.ಹಿಂದಿ ಭಾಷೆಯನ್ನು ಹೇರುವುದರ ವಿರುದ್ಧ ತಮ್ಮ ನಿಲುವನ್ನು ಪುನರುಚ್ಚರಿಸಿದ ಮುಖ್ಯಮಂತ್ರಿಗಳು, ಶಾಲೆಗಳಲ್ಲಿ ಹಿಂದಿ ಭಾಷೆಯನ್ನು ಕಡ್ಡಾಯ ಮಾಡಬಾರದು ಎಂಬುದು ಸರ್ಕಾರದ ನಿಲುವು.ಹಿಂದಿ ಕಲಿಯಬಾರದು ಎಂದು ನಾವು ಹೇಳುತ್ತಿಲ್ಲ, ಆದರೆ ಆ ಭಾಷೆಯ ಪರೀಕ್ಷೆಯನ್ನು ಕಡ್ಡಾಯಗೊಳಿಸಬಾರದು ಅಷ್ಟೆ ಎಂದರು.
ಯಾವುದೇ ಹೊಸ ನೀತಿ ಜಾರಿಗೆ ಬಂದಾಗ ಪರ ಮತ್ತು ವಿರೋಧ ಅಭಿಪ್ರಾಯಗಳು ಇರುವುದು ಸಹಜ, ಆದರೆ ಈ ವರ್ಷದಿಂದಲೇ ದ್ವಿಭಾಷಾ ನೀತಿ ಜಾರಿಯಲ್ಲಿರುತ್ತದೆ. ಈ ವರ್ಷದಿಂದಲೇ ತೃತೀಯ ಭಾಷೆ ಹಿಂದಿಯನ್ನು ಅಂಕಗಳಿಗೆ ಪರಿಗಣಿಸದೇ, ಎಸ್ ಎಸ್ ಎಲ್ ಸಿ ಯಲ್ಲಿ 625 ಅಂಕಗಳನ್ನು 525 ಕ್ಕೆ ನಿಗದಿಪಡಿಸಲು ತೀರ್ಮಾನಿಸಲಾಗಿದೆ.
ಸರ್ಕಾರದ ಯಾವುದೇ ತೀರ್ಮಾನಕ್ಕೆ ಬೆಂಬಲ ಇಲ್ಲವೇ ವಿರೋಧವೂ ವ್ಯಕ್ತವಾಗಬಹುದು. ಹಿಂದಿ ಭಾಷೆಯನ್ನು ಕಲಿಯುವುದರಲ್ಲಿ ಸರ್ಕಾರದ ವಿರೋಧವಿಲ್ಲ , ಆದರೆ ಪರೀಕ್ಷೆಯ ಅಂಕಗಳಿಗೆ ಕಡ್ಡಾಯವಾಗಬಾರದು ಎಂದರು.
ಬೈ ಎಲೆಕ್ಷನ್ ಮತ್ತು ರಾಜಕೀಯ ಬೆಳವಣಿಗೆ
ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಗಳ ಕುರಿತು ಪ್ರತಿಕ್ರಿಯಿಸಿದ ಸಿಎಂ, “ಎರಡೂ ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ. ನಾನು ಕೂಡ ಬಾಗಲಕೋಟೆ, ದಾವಣಗೆರೆ ಪ್ರವಾಸ ಕೈಗೊಳ್ಳಲಿದ್ದೇನೆ. ಹೈಕಮಾಂಡ್ ಅನುಮತಿ ನೀಡಿದರೆ ಮುಂದಿನ ಎರಡು ಬಜೆಟ್ಗಳನ್ನು ನಾನೇ ಮಂಡಿಸುತ್ತೇನೆ. ಈ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.




