ಬೆಂಗಳೂರು : ರಾಜ್ಯದಲ್ಲಿ ಪೊಲೀಸರು ಜಾತಿ ತಾರತಮ್ಯ ಪ್ರಕರಣಗಳನ್ನ ಗಂಭೀರವಾಗಿ ಪರಿಗಣಿಸಿ ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ರಾಜಭವನದಲ್ಲಿ ನಡೆದ ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.ಸರ್ಕಾರವು ಪ್ರತಿ ಜಿಲ್ಲೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ.
ನಾನು ಇತ್ತೀಚೆಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳ ಕಾರ್ಯ ಮತ್ತು ಪ್ರಗತಿ ತೃಪ್ತಿದಾಯಕವಿಲ್ಲ ಎಂಬುದನ್ನು ಗಮನಿಸಿದ್ದೇನೆ. ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ದುರ್ಬಲವರ್ಗದವರಿಗೆ ಸುರಕ್ಷತೆ ಒದಗಿಸುವ ಸರ್ಕಾರದ ಉದ್ದೇಶ ಸಫಲವಾಗಬೇಕು.
ಇತರೆ ರಾಜ್ಯಗಳಿಗೆ ಹೋಲಿಸಿದರೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ವಿರುದ್ಧ ಶಿಕ್ಷೆಯ ಪ್ರಮಾಣ ಬಹಳ ಕಡಿಮೆಯಿದೆ. ಈ ಬಗ್ಗೆ ಪೊಲೀಸರು ಗಮನಹರಿಸಬೇಕು ಎಂದರು.
ಇಂದು ವಿಶಿಷ್ಠ ಸೇವೆ ಸಲ್ಲಿಸಿರುವ ಪೊಲೀಸರಿಗೆ ಕೊಡಮಾಡಲಾದ ಸೇವಾಪದಕದ ಹಿಂದೆ ಅವರ ಸೇವಾ ಮನೋಭಾವ, ಪ್ರಮಾಣಿಕತೆ ಹಾಗೂ ಪರಿಶ್ರಮವಿರುತ್ತದೆ. ಸಾಮಾಜಿಕ ಕಳಕಳಿಯೊಂದಿಗೆ ಸೇವೆ ಸಲ್ಲಿಸಿದಾಗ ಮಾತ್ರ ಇಂತಹ ಸಾಧನೆ ಸಾಧ್ಯವಾಗುತ್ತದೆ.
ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಜನರ ಆಸ್ತಿಪಾಸ್ತಿ ಸಂರಕ್ಷಿಸುವುದು ಪೊಲೀಸರ ಜವಾಬ್ದಾರಿ. ದೇಶದಲ್ಲಿ ಶಾಂತಿ ನೆಮ್ಮದಿ ನೆಲೆಸುವಲ್ಲಿ ಪೊಲೀಸರ ಪಾತ್ರ ಅತ್ಯಂತ ಮಹತ್ವವಾದುದು.
ಸಮಾಜದಲ್ಲಿ ನಡೆಯುವ ಅಪರಾಧಗಳನ್ನು ತಡೆಗಟ್ಟುವ ಜವಾಬ್ದಾರಿ ಸರ್ಕಾರ ಹಾಗೂ ಪೊಲೀಸಿನವರದ್ದಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಬಹಳಷ್ಟು ಅಪರಾಧಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು.




