ಬೆಂಗಳೂರು : ಶೀಘ್ರದಲ್ಲೇ ರಾಜ್ಯ ಬಜೆಟ್ ಮಂಡನೆಯ ದಿನಾಂಕವನ್ನು ಘೋಷಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಶೀಘ್ರದಲ್ಲೇ ರಾಜ್ಯ ಬಜೆಟ್ ಮಂಡನೆಯ ದಿನಾಂಕವನ್ನು ಘೋಷಣೆ ಮಾಡುತ್ತೇನೆ.ಹಬ್ಬ ಮುಗಿಯಲಿ, ಹಬ್ಬದ ನಂತರ ದಿನಾಂಕ ಪ್ರಕಟಿಸುತ್ತೇನೆ’ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಾದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, “ನಾನಾಗಲಿ ಅಥವಾ ಡಿ.ಕೆ. ಶಿವಕುಮಾರ್ ಆಗಲಿ, ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುತ್ತೇವೆ” ಎಂದು ಸ್ಪಷ್ಟಪಡಿಸಿದರು.
ಪದೇ ಪದೇ ನಾಯಕತ್ವ ಬದಲಾವಣೆ ಬಗ್ಗೆ ಪ್ರಶ್ನೆ ಕೇಳಿದ ಮಾಧ್ಯಮಗಳ ವಿರುದ್ಧ ಸಿಎಂ ಅಸಮಾಧಾನ ವ್ಯಕ್ತಪಡಿಸಿದರು. “ಬೇರೆ ವಿಷಯಗಳಿಲ್ಲವೇ? ಈ ಬಗ್ಗೆ ಯಾರಾದರೂ ಹೇಳಿಕೆ ನೀಡಿದ್ದರೆ ಅವರನ್ನೇ (ಡಿ.ಕೆ. ಸುರೇಶ್ ಅವರಂತಹವರು) ಹೋಗಿ ಕೇಳಿ” ಎಂದು ಖಾರವಾಗಿ ಉತ್ತರಿಸಿದರು.
ಶಾಸಕರು ವಿದೇಶ ಪ್ರವಾಸ ಕೈಗೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರು ತಮ್ಮ ಸ್ವಂತ ಹಣದಲ್ಲಿ ಪ್ರವಾಸಕ್ಕೆ ಹೋದರೆ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದರು. ಮೂಲಗಳ ಪ್ರಕಾರ ಮಾರ್ಚ್ ಮೊದಲ ವಾರ ಅಥವಾ 2 ನೇ ವಾರದಲ್ಲಿ ಬಜೆಟ್ ಮಂಡನೆಯಾಗುವ ಸಾಧ್ಯತೆಯಿದೆ.
ಈ ಬಾರಿಯ ಬಜೆಟ್ನಲ್ಲಿಯೂ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ಮತ್ತು ಹಣ ಮೀಸಲಿಡುವ ಸಾಧ್ಯತೆಯಿದೆ. ಅಭಿವೃದ್ಧಿ ಕೆಲಸಗಳು, ಕೃಷಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಬಜೆಟ್ನಲ್ಲಿ ಯಾವ ರೀತಿ ಹಣ ಹಂಚಿಕೆಯಾಗುತ್ತದೆ ಎಂಬ ಕುರಿತು ರಾಜ್ಯದ ಜನರಲ್ಲಿ ಭಾರಿ ಕುತೂಹಲವಿದೆ.




