ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ( politics ) ನವೆಂಬರ್ ಕ್ರಾಂತಿ ಚರ್ಚೆ ಆಗುತ್ತಿರುವ ಬೆನ್ನಲ್ಲೇ ಬಿಜೆಪಿ (Bjp ) ಮಹತ್ವದ ಕೋರ್ ಕಮಿಟಿ ಸಭೆ ನಡೆಯಲಿದೆ.
ಬಿಜೆಪಿ ಕೋರ್ ಕಮಿಟಿಯ ಇವತ್ತು ಭಾನುವಾರ ಸಂಜೆ 5 ಗಂಟೆಗೆ ನಡೆಯಲಿದ್ದು, ರೈತರಿಗೆ ಅತಿವೃಷ್ಟಿ ಪರಿಹಾರ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಮತ್ತಿತರ ವಿಷಯಗಳ ಬಗ್ಗೆ ಕೈಗೊಳ್ಳಬೇಕಾದ ಹೋರಾಟದ ಕುರಿತಾಗಿ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಸಭೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ವಿರೋಧಿಸಿ ಕಾನೂನು ಹೋರಾಟದ ಜೊತೆಗೆ ರಾಜಕೀಯ ಹೋರಾಟ ನಡೆಸುವ ಬಗ್ಗೆ ಬಿಜೆಪಿ ನಾಯಕರು ಚಿಂತನೆ ನಡೆಸಿದ್ದಾರೆ.
ಅತಿವೃಷ್ಟಿ ಪೀಡಿತ ರೈತರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಹೋರಾಟ ನಡೆಸುವ ನಿರೀಕ್ಷೆ ಇದೆ. ಇಂದಿನ ಸಭೆಯಲ್ಲಿ ಈ ವಿಷಯಗಳ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎನ್ನಲಾಗಿದೆ.
ಇದಲ್ಲದೆ, ರಾಜ್ಯ ಸರ್ಕಾರದ ಆಡಳಿತ ವೈಫಲ್ಯವನ್ನು ಜನರಿಗೆ ಮನದಟ್ಟು ಮಾಡಿಕೊಡುವ ಕುರಿತು ಹೋರಾಟ ನಡೆಸುವ ರೂಪುರೇಶಗಳನ್ನು ಸಹ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಮಾಡಲಾಗುತ್ತದೆ ಎನ್ನಲಾಗಿದೆ.




