ಹುಬ್ಬಳ್ಳಿ : ನಗರ ತಾಲೂಕು 11 ನೇಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಾರ್ಚ್ 15 ರಂದು ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ಜಿಲ್ಲಾ ಅಧ್ಯಕ್ಷ ಡಾ.ಲಿಂಗರಾಜ ಅಂಗಡಿ ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, ಅಂದು ಬೆಳಿಗ್ಗೆ 8.15 ಕ್ಕೆ ಧ್ವಜಾರೋಹಣ ನೇರವೇರಿಸಲಾಗುವುದು, ಬೆಳಿಗ್ಗೆ 9 ಕ್ಕೆ ಸರ್ವಾಧ್ಯಕ್ಷರ ಮೆರವಣಿಗೆ ಲಿಂಗರಾಜ ನಗರದ ದಕ್ಷಿಣ ಸಮುದಾಯ ಭವನದಿಂದ ಸಭಾಂಗಣದವರೆಗೆ ನಡೆಯಲಿದೆ. ಇದಕ್ಕೆ ಕಟ್ಟಿ ಮಂಗಳಾದೇವಿ ಮತ್ತು ಆಂಜನೇಯ ದೇವಾಲಯ ಸಮಿತಿ ಅಧ್ಯಕ್ಷ ಪ್ರೋ.ಜಿ.ವಿ.ವಳಸಂಗ ಚಾಲನೆ ನೀಡಲಿದ್ದಾರೆ ಎಂದರು.
ಬೆಳಿಗ್ಗೆ 10 ಕ್ಕೆ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭ ನಡೆಯಲಿದೆ. ಸಾನಿಧ್ಯವನ್ನು ಮೂರುಸಾವಿರಮಠದ ಡಾ.ಗುರುಸಿದ್ದ ರಾಜಯೋಗೀಂದ್ರ ಮಹಾಸ್ವಾಮಿಗಳು ವಹಿಸಲಿದ್ದಾರೆ. ಉದ್ಘಾಟನೆಯನ್ನು ಹಿರಿಯ ಸಾಹಿತಿ ಡಾ.ಜಯಶ್ರೀ ವೀರಣ್ಣ ದಂಡೆ ಮಾಡಲಿದ್ದು, ಅಧ್ಯಕ್ಷತೆಯನ್ನು ಡಾ.ಪಿ.ಎಲ್.ಪಾಟೀಲ್ ವಹಿಸಲಿದ್ದಾರೆ. ಪುಸ್ತಕ ಬಿಡುಗಡೆಯನ್ನು ಶಾಸಕ ಮಹೇಶ ಟೆಂಗಿನಕಾಯಿ, ಹು-ಧಾ ಮಹಾನಗರ ಪಾಲಿಕೆ ಉಪಮೇಯರ್ ಸಂತೋಷ ಚೌಹಾನ್ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಪ್ರಸಾದ್ ಅಬ್ಬಯ್ಯ, ವಿಪ ಸದಸ್ಯ ಪ್ರದೀಪ್ ಶೆಟ್ಟರ್, ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ಮೀನಾಕ್ಷಿ ವಂಟಮುರಿ ಸೇರಿದಂತೆ ಮುಂತಾದ ಗಣ್ಯಮಾನ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಮಧ್ಯಾಹ್ನ 12 ರಿಂದ ಗೋಷ್ಠಿ-ಕವಿಗೋಷ್ಠಿಗಳು ನಡೆಯಲಿವೆ. 3.30 ಕ್ಕೆ ಸರ್ವಾಧ್ಯಕ್ಷರೊಂದಿಗೆ ಮಾತುಕತೆ ನಡೆಯಲಿದೆ. ಸಂಜೆ 4.30 ಕ್ಕೆ ಬಹಿರಂಗ ಸಭೆ ನಡೆಯಲಿದೆ ಎಂದು ತಿಳಿಸಿದರು.
ಕೊನೆಯದಾಗಿ ಸಮಾರೋಪ ಸಮಾರಂಭ ನಡೆಯಲಿದೆ. ಅಧ್ಯಕ್ಷತೆಯನ್ನು ವಾಣಿಜ್ಯ ತೆರಿಗೆಗಳ ಇಲಾಖೆಯ ನಿವೃತ್ತ ಉಪ ಆಯುಕ್ತರಾದ ಗೋವಿಂದಪ್ಪ ಗೌಡಪ್ಪಗೋಳ ಅಧ್ಯಕ್ಷತೆ ವಹಿಸಲಿದ್ದಾರೆ. ಬಳಿಕ ಸಾಹಿತಿ ಡಾ.ಸ್ನೇಹಾ ಭೂಸನೂರ ಸರ್ವಾಧ್ಯಕ್ಷರ ನುಡಿ ಆಡಲಿದ್ದಾರೆ, ಮುಖ್ಯ ಅತಿಥಿಗಳಾಗಿ ವಿಪ ಸದಸ್ಯ ಎಚ್.ಎಫ್.ಜಕ್ಕಪ್ಪನವರ, ಮಾಜಿ ವಿಪ ಸದಸ್ಯ ಮೋಹನ ಲಿಂಬಿಕಾಯಿ, ಹು-ಧಾ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸೇರಿದಂತೆ ಮುಂತಾದ ಗಣ್ಯಮಾನ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.
ಕೊನೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಗೌರವ ಕಾರ್ಯದರ್ಶಿ ಚನ್ನಬಸಪ್ಪ ಧಾರವಾಡಶೆಟ್ರ, ಶರಣಪ್ಪ ಮತ್ತಿಗಟ್ಟಿ, ವಿದ್ಯಾ ವಂಟಮುರಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ವರದಿ : ಸುಧೀರ್ ಕುಲಕರ್ಣಿ




