ಬೆಳಗಾವಿ: ಗೋವಾದಿಂದ ಮಹಾರಾಷ್ಟ್ರಕ್ಕೆ 400 ಕೋಟಿ ರೂಪಾಯಿ ನಗದು ಸಾಗಿಸುತ್ತಿದ್ದ ಎರಡು ಕಂಟೇನರ್ ಗಳನ್ನು ಹೈಜಾಕ್ ಮಾಡಿರುವ ದೇಶದ ಅತಿ ದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ದೇಶದ ಇತಿಹಾಸದಲ್ಲಿ ಬೆಚ್ಚಿಬೀಳಿಸುವ ಅತಿ ದೊಡ್ಡ ದರೋಡೆ ಪ್ರಕರಣ ಇದಾಗಿದೆ ಎಂದು ಹೇಳಲಾಗಿದೆ.
ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಪೊಲೀಸ್ ಸಿಬ್ಬಂದಿ ತನಿಖೆ ಕೈಗೊಂಡಿದ್ದಾರೆ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಚೋರ್ಲಾ ಘಾಟ್ ಪ್ರದೇಶದಲ್ಲಿ 400 ಕೋಟಿ ರೂ. ನಗದು ತುಂಬಿದ್ದ ಎರಡು ಕಂಟೇನರ್ ನಾಪತ್ತೆಯಾಗಿದ್ದು, ತನಿಖೆಗೆ ಸಹಕರಿಸಲು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಬೆಳಗಾವಿ ಪೊಲೀಸರಿಗೆ ಪತ್ರ ಬರೆದಿದ್ದಾರೆ.
2025ರ ಅಕ್ಟೋಬರ್ 16 ರಂದು ಈ ದರೋಡೆ ನಡೆದಿದ್ದು, ಹಲವು ತಿಂಗಳ ನಂತರ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಕಿಶೋರ್ ಶೇಟ್ ಗೆ ಸೇರಿದ ಹಣ ಇದಾಗಿದೆ ಎಂದು ಹೇಳಲಾಗಿದೆ.
ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಎರಡು ಕಂಟೇನರ್ ಗಳು ಖಾನಾಪುರ ತಾಲೂಕಿನ ಅಪಾಯಕಾರಿ ಅರಣ್ಯ ಪ್ರದೇಶವಾದ ಚೋರ್ಲಾ ಘಾಟ್ ಮಾರ್ಗದಲ್ಲಿ ಏಕಾಏಕಿ ನಾಪತ್ತೆಯಾಗಿವೆ. ಈ ಕಂಟೇನರ್ ಗಳಲ್ಲಿ 400 ಕೋಟಿ ಅಧಿಕ ನಗದು ಸಾಗಿಸಲಾಗುತ್ತಿತ್ತು.
ನಾಸಿಕ್ ಮೂಲದ ಸಂದೀಪ್ ಪಾಟೀಲ್ ಎಂಬಾತನನ್ನು ರಿಯಲ್ ಎಸ್ಟೇಟ್ ಉದ್ಯಮಿ ಕಿಶೋರ್ ಶೇಟ್ ಸಹಚರರು ಗನ್ ಪಾಯಿಂಟ್ ನಲ್ಲಿ ಅಪಹರಿಸಿ ಅಕ್ರಮ ಬಂಧನದಲ್ಲಿ ಇಟ್ಟುಕೊಂಡಿದ್ದರು. ಒಂದೂವರೆ ತಿಂಗಳು ಬಂಧನದಲ್ಲಿಟ್ಟುಕೊಂಡು 400 ಕೋಟಿ ಇದ್ದ ಕಂಟೇನರ್ ಹೈಜಾಕ್ ಬಗ್ಗೆ ಮಾಹಿತಿ ನೀಡುವಂತೆ ಚಿತ್ರಹಿಂಸೆ ನೀಡಿದ್ದರು.
ಅವರಿಂದ ತಪ್ಪಿಸಿಕೊಂಡು ಬಂದ ಸಂದೀಪ್ ಪಾಟೀಲ್ ನಾಸಿಕ್ ಪೊಲೀಸರಿಗೆ 2026ರ ಜನವರಿ 1ರಂದು ದೂರು ನೀಡಿದ್ದಾರೆ. ಅದರಲ್ಲಿ 400 ಕೋಟಿ ರೂ. ಕಂಟೇನರ್ ನಾಪತ್ತೆಯಾಗಿ ತಮಗೆ ಹಿಂಸೆ ನೀಡಿದ ಬಗ್ಗೆ ತಿಳಿಸಿದ್ದಾರೆ.
ಕೂಡಲೇ ಮಹಾರಾಷ್ಟ್ರ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದ ಗಂಭೀರತೆ ಮತ್ತು ಹಣದ ಮೊತ್ತ ಹೆಚ್ಚಾಗಿರುವುದನ್ನು ಗಮನಿಸಿದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ದರೋಡೆ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಿದ್ದಾರೆ. ಮಹಾರಾಷ್ಟ್ರ ಸರ್ಕಾರದಿಂದ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರಿಗೆ ಪತ್ರ ಬರೆದು ತನಿಖೆಗೆ ಸಹಕಾರ ನೀಡುವಂತೆ ಕೋರಲಾಗಿದೆ.




