ಅರಸೀಕೆರೆ: ನಗರದ ಹೃದಯ ಭಾಗದಲ್ಲಿರುವ ಬಸ್ ಡಿಪೋ ಪಕ್ಕದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿರುವ ಬಸ್ ನಿಲ್ದಾಣದಲ್ಲಿ ತೀವ್ರ ಅವ್ಯವಸ್ಥೆ ಉಂಟಾಗಿ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್ ಮುಖಂಡ ಎನ್ ಆರ್ ಸಂತೋಷ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಆಗ್ರಹಿಸಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರು.
ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳು:
ಪ್ರತಿಭಟನಾಕಾರರು ಪ್ರಯಾಣಿಕರ ಹಿತದೃಷ್ಟಿಯಿಂದ ಈ ಕೆಳಗಿನ 7 ಪ್ರಮುಖ ಬೇಡಿಕೆಗಳನ್ನು ಅಧಿಕಾರಿಗಳ ಮುಂದಿಟ್ಟರು:
ನಿಲ್ದಾಣದಲ್ಲಿ ತಕ್ಷಣವೇ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು.
ಬಿಸಿಲು ಮತ್ತು ಮಳೆಯಿಂದ ರಕ್ಷಣೆ ಪಡೆಯಲು ಪ್ರಯಾಣಿಕರಿಗೆ ತಾತ್ಕಾಲಿಕ ಶೆಡ್ ಅಥವಾ ನೆರಳಿನ ವ್ಯವಸ್ಥೆ ಕಲ್ಪಿಸಬೇಕು.
ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕವಾದ ತಾತ್ಕಾಲಿಕ ಶೌಚಾಲಯದ ವ್ಯವಸ್ಥೆ ನಿರ್ಮಿಸಬೇಕು.
ಬಾಣಂತಿಯರಿಗೆ ಮತ್ತು ಎಳೆಯ ಮಕ್ಕಳಿಗೆ ಹಾಲುಣಿಸಲು ಅನುಕೂಲವಾಗುವಂತೆ ಪ್ರತ್ಯೇಕ ವಿಶ್ರಾಂತಿ ಗೃಹ ಸ್ಥಾಪಿಸಬೇಕು.
ವಿದ್ಯಾರ್ಥಿಗಳು, ಗಾರ್ಮೆಂಟ್ಸ್ ನೌಕರರು ಮತ್ತು ಕೂಲಿ ಕಾರ್ಮಿಕರ ಅನುಕೂಲಕ್ಕಾಗಿ ಕೋಡಿಹಳ್ಳಿಯಿಂದ ಜಾಜೂರಿನವರೆಗೆ ಉಚಿತ ಸಿಟಿ ಬಸ್ ಮಾದರಿಯ ವ್ಯವಸ್ಥೆ ಮಾಡಬೇಕು.

ಸಂಚಾರ ದಟ್ಟಣೆ ಕಡಿಮೆ ಮಾಡಲು ಕೆಎಸ್ಆರ್ಟಿಸಿ ಡಿಪೋ ಕಾಂಪೌಂಡ್ ಪಕ್ಕದಲ್ಲಿ ಆಟೋಗಳ ನಿಲುಗಡೆಗೆ ಅವಕಾಶ ನೀಡಬೇಕು.
ನಿಲ್ದಾಣವನ್ನು ಕಳ್ಳರಿಗೆ ಅನುಕೂಲವಾಗುವ ರೀತಿಯಲ್ಲಿ ನಿರ್ಮಿಸಲಾಗಿದೆ ಕಳ್ಳರ ಹಾವಳಿ ತಡೆಯಲು ನಿಲ್ದಾಣದ ಆವರಣದಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಎಂದು ತಿಳಿಸಿದರು ಹಾಗೂ ಆದಷ್ಟು ಬೇಗ ಅಗತ್ಯ ಸೌಲಭ್ಯಗಳನ್ನು ಒದಗಿಸದಿದ್ದರೆ ಮುಂದಿನ ದಿನಗಳಲ್ಲಿ ಬಸ್ ನಿಲ್ದಾಣದಲ್ಲೇ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದರು.
“ತಾತ್ಕಾಲಿಕ ನಿಲ್ದಾಣ ಎನ್ನುವ ಕಾರಣಕ್ಕೆ ಸಾರ್ವಜನಿಕರಿಗೆ ಕನಿಷ್ಠ ಸೌಲಭ್ಯವನ್ನೂ ನೀಡದೆ ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ. ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು.” – ಪ್ರತಿಭಟನಾಕಾರರು.
ಅಧಿಕಾರಿಗಳ ಸ್ಪಂದನೆ:
ಕೆಎಸ್ಆರ್ಟಿಸಿ ಜಿಲ್ಲಾ ವರಿಷ್ಠಾಧಿಕಾರಿಗಳು, ಸಾರ್ವಜನಿಕರ ನ್ಯಾಯಯುತ ಬೇಡಿಕೆಗಳನ್ನು ಆಲಿಸಿದರು. “ಪ್ರಯಾಣಿಕರ ಸಮಸ್ಯೆಗಳು ನಮ್ಮ ಗಮನಕ್ಕೆ ಬಂದಿದ್ದು, ಪಟ್ಟಿ ಮಾಡಲಾದ ಎಲ್ಲಾ ಬೇಡಿಕೆಗಳಿಗೆ ತಕ್ಷಣದಿಂದಲೇ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು,” ಎಂದು ಭರವಸೆ ನೀಡಿದರು.
ಅಧಿಕಾರಿಗಳ ಭರವಸೆಯ ನಂತರ ಸಮಾಧಾನಗೊಂಡ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆಯನ್ನು ಹಿಂಪಡೆದರು
ವರದಿ :ರಾಜು ಅರಸಿಕೆರೆ




