ಕಾರವಾರ: ಜೂನ್ ಒಳಗೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅಂಕೋಲಾ ತಾಲೂಕಿನ ಮಂಜುಗಣಿಯಲ್ಲಿ ಭಾನುವಾರ ಗಂಗಾವಳಿ -ಮಂಜುಗಣಿ ಸೇತುವೆ ಉದ್ಘಾಟಿಸಿ ಅವರು ಮಾತನಾಡಿದರು.
ಗೋಕರ್ಣ ಪಟ್ಟಣ ಪಂಚಾಯಿತಿ ಮೇಲ್ದರ್ಜೆಗೇರಿಸುವಂತೆ ಬೇಡಿಕೆ ಇದೆ.ಆದರೆ, ಚುನಾವಣೆ ಸಮೀಪಿಸಿದ್ದು, ಜನಗಣತಿ ಕೂಡ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಹೊಸದಾಗಿ ಪಟ್ಟಣ ಪಂಚಾಯಿತಿ ರಚನೆ ಸಾಧ್ಯವಿಲ್ಲ. ಚುನಾವಣೆ ಮುಗಿದ ನಂತರ ಗೋಕರ್ಣ ಪಟ್ಟಣ ಪಂಚಾಯಿತಿ ರಚನೆ ಮಾಡುವುದಾಗಿ ಹೇಳಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ನೀತಿ ರೂಪಿಸಲಾಗುತ್ತಿದ್ದು, ಕರ್ನಾಟಕದತ್ತ ಪ್ರವಾಸಿಗರನ್ನು ಸೆಳೆಯುವ ಯೋಜನೆ ಕಾರ್ಯಗತಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಸಚಿವ ಮಂಕಾಳ ವೈದ್ಯ, ಶಾಸಕರಾದ ಆರ್.ವಿ. ದೇಶಪಾಂಡೆ, ಸತೀಶ್ ಸೈಲ್, ದಿನಕರ ಶೆಟ್ಟಿ, ಭೀಮಣ್ಣ ನಾಯ್ಕ ಮತ್ತಿತರರು ಇದ್ದರು.




